
ಮಂಡ್ಯ:ಫೆಬ್ರವರಿ11: ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಹೀಗಾಗಿ ಕಾಂಗ್ರೆಸ್ ಪಕ್ಷದ ಹಸ್ತಕ್ಕೆ ಮತ ಹಾಕಿ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ. ನಮ್ಮ ಪಕ್ಷ ಕಾರ್ಯಕ್ರಮ ಕೊಟ್ಟರೆ ಎಲ್ಲಾ ವರ್ಗದ ಜನರಿಗೂ ನೆರವಾಗುವ ಯೋಜನೆ ನೀಡಿದೆ. ಇಂತಹ ಯಾವುದಾದರೂ ಒಂದು ಯೋಜನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರ ನೀಡಿದೆಯೇ? ಎಂದು ತಮ್ಮಣ್ಣ ಅವರನ್ನು ನೀವು ಪ್ರಶ್ನೆ ಮಾಡಬೇಕು ಎಂದರು.
ನೀವು ಹೊಸಬರಿಗೆ ಅವಕಾಶ ಮಾಡಿ ಕೊಡಿ. ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯ ಹಾಗೂ ರಾಷ್ಟ್ರ ಕಾಪಾಡಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು.ಇದು ಮಹಿಳಾ ನಾಯಕಿಯರನ್ನು ಆಯ್ಕೆ ಮಾಡಿರುವ ಜಿಲ್ಲೆ. ಇಲ್ಲಿ ಯಾರೇ ನಿಂತರು, ಡಿ.ಕೆ. ಶಿವಕುಮಾರ್ ಅಭ್ಯರ್ಥಿ. ನನಗೆ ಮಂಡ್ಯ, ರಾಮನಗರ ಹಾಗೂ ಕನಕಪುರ ಒಂದೇ ಎಂದರು.
ಬೆಲೆ ಏರಿಕೆಯಿಂದ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಆದಾಯ ಮಾತ್ರ ಡಬಲ್ ಆಗಲಿಲ್ಲ. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಗ್ಯಾರಂಟಿ ಯೋಜನೆ ಘೋಷಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಆಮೂಲಕ ಇನ್ನು ಮುಂದೆ ನೀವು 200 ಯುನಿಟ್ ಒಳಗೆ ವಿದ್ಯುತ್ ಬಳಸಿದರೆ ಯಾರೂ ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲ.
ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ ಕೊಡ್ತೆವೆ. ಜತೆಗೆ 10 ಕೆಜಿ ಅಕ್ಕಿ. ನಾನು ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ನಿಮ್ಮ ಮನೆಗೆ ಬರ್ತದೆ. ಇನ್ನು ಪ್ರತಿ ಮನೆಗೆ ನೀಡಲಾಗುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಕೆ ಮಾಡುತ್ತೇವೆ. ಮೇ ತಿಂಗಳಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ, ಜೂನ್ ತಿಂಗಳಿಂದ ಈ ಯೋಜನೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ನಾವು ಯೋಜನೆ ಜಾರಿ ಮಾಡದಿದ್ದರೆ ನಾನು ಮತ್ತೆ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ.
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅವರದೇ ಆದ ಸಿದ್ಧಾಂತದ ಮೇಲೆ ಆಡಳಿತ ನಡೆಸುತ್ತಿದೆ. ಈ ಜಿಲ್ಲೆಯಲ್ಲಿ 7 ಜೆಡಿಎಸ್ ಶಾಸಕರನ್ನು ಕೊಟ್ಟಿದ್ದೀರಿ. ನಾವು 80 ಸೀಟು ಗೆದ್ದಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು 38 ಸ್ಥಾನ ಗೆದ್ದಿದ್ದ ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿದ್ದೆವು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ನಾಯಕರಲ್ಲಿ ಹಲವು ಭಿನ್ನಾಭಿಪ್ರಾಯ ಇದ್ದರೂ ಕೂಡ ನಾನು ಹಾಗೂ ಕಾಂಗ್ರೆಸ್ ಪಕ್ಷ ಅವರ ಬೆಂಬಲಕ್ಕೆ ನಿಂತಿದ್ದೆವು. ರಾಜಕೀಯದಲ್ಲಿ ಭಿನ್ನ ಅಭಿಪ್ರಾಯ ಇದ್ದರೂ ಒಂದು ಸಿದ್ಧಾಂತಕ್ಕಾಗಿ ನಾನು ಅವರ ಬೆಂಬಲಕ್ಕೆ ನಿಂತೆ. ಕುಮಾರಸ್ವಾಮಿ ಅವರೇ ಶಿವಕುಮಾರ್ ನಮ್ಮ ಜತೆ ನಿಂತಿದ್ದಾರೆ, ನಾವು ಜೋಡೆತ್ತುಗಳು ಎಂದು ಹೇಳಿದ್ದರು.
ಚುನಾವಣೆಗೂ ಮುನ್ನ ಕೊಟ್ಟ ಯಾವುದೇ ಭರವಸೆ ಈಡೇರಿಸಿಲ್ಲ. ಮೋದಿ ಅವರು ಅಚ್ಛೇದಿನ ನೀಡುತ್ತೇವೆ ಎಂದರು, ನಿಮ್ಮ ಆದಾಯ ಡಬಲ್ ಮಾಡುತ್ತೇವೆ ಎಂದರು, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು, ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು, ಈ ಭರವಸೆಗಳನ್ನು ಈಡೇರಿಸಿದ್ದಾರಾ? ಅವರಿಂದ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಆಯಿತಾ? ಎಂದು ಪ್ರಶ್ನಿಸಿದ್ದಾರೆ.